
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಜೋಡಿಕೃಷ್ಣಾಪುರ ಗ್ರಾಮದಲ್ಲಿ ಮೃತ್ಯುಂಜಯ ಎಂಬುವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ತಡರಾತ್ರಿವರೆಗೆ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಮಾದಕ ವಸ್ತು ಸಾಗಣೆ ಹಾಗೂ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸೇರಿದಂತೆ ವಿವಿಧೆಡೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಆರೋಪಿಯ ಮೇಲೆ ಈ ಹಿಂದೆಯೇ ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಇ.ಡಿ ಅಧಿಕಾರಿಗಳು ಈಗ ತನಿಖೆಯನ್ನು ಚುರುಕುಗೊಳಿಸಿದ್ದಾರೆ.